Paddy: ಭತ್ತ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
ಭಾರತ ಕೃಷಿ ಪ್ರಧಾನ ರಾಷ್ಟ್ರ. ಇಲ್ಲಿ ಶೇ.60ಕ್ಕಿಂತ ಹೆಚ್ಚು ಜನಸಂಖ್ಯೆ ಕೃಷಿ ರಂಗವನ್ನೇ ಅವಲಂಬಿಸಿದೆ. ಆದರೂ, ದೇಶದ ಕೃಷಿ ಕ್ಷೇತ್ರ ಹಲವು ಸಮಸ್ಯೆಗಳಿಂದ ಕೂಡಿದೆ. ರೈತರು ನೀರಾವರಿ, ಮಾರುಕಟ್ಟೆ ಸಮಸ್ಯೆ, ಬೆಲೆ ಕುಸಿತ, ಕಡಿಮೆ ಇಳುವರಿ ಮೊದಲಾದ ಸಮಸ್ಯೆಗಳ ವಿಷವರ್ತುಲದಲ್ಲಿ ಸಿಲುಕಿದ್ದಾರೆ. ಹೀಗಾಗಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲೆಂದೇ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಪೈಕಿ ‘ಕನಿಷ್ಠ ಬೆಂಬಲ ಬೆಲೆ’ ಯೋಜನೆ ಪ್ರಮುಖವಾದುದು.
ಕನಿಷ್ಠ ಬೆಂಬಲ ಬೆಲೆ ಎಂದರೇನು?
ಕೃಷಿ ಉತ್ಪನ್ನದ ಬೆಲೆಯಲ್ಲಿ ತೀವ್ರ ಕುಸಿತ ಉಂಟಾದಾಗ ರೈತರಿಗೆ ನೆರವಾಗಲೆಂದು ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯನ್ನು ಜಾರಿಗೆ ತರಲಾಗಿದೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಕೆಲವು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತದೆ. ಕೃಷಿ ಉತ್ಪಾದನೆ ಹೆಚ್ಚಳವಾದಾಗ ಬೆಲೆಗಳು ತೀವ್ರ ಇಳಿಕೆಯಾಗುತ್ತದೆ. ಇದರಿಂದ ರೈತ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಾನೆ. ಹೀಗಾಗಿ ಕೇಂದ್ರ ಸರ್ಕಾರವೇ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿರ್ಧರಿಸುತ್ತದೆ. ಇದರಿಂದ ಬೆಲೆ ಕುಸಿತದ ವಿರುದ್ಧ ರೈತರನ್ನು ರಕ್ಷಿಸಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆಗಳು ಸರ್ಕಾರದಿಂದ ಕೃಷಿ ಉತ್ಪನ್ನಗಳಿಗೆ ನೀಡುವ ಖಾತರಿಯ ಬೆಲೆಯಾಗಿದೆ. ಸರಿಯಾದ ಬೆಲೆಗೆ ಸರ್ಕಾರವೇ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವುದರಿಂದ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಸಮಸ್ಯೆಯೂ ತಪ್ಪುತ್ತದೆ. ಅಲ್ಲದೆ ಸರ್ಕಾರವು ಸಾರ್ವಜನಿಕ ವಿತರಣೆಗಾಗಿ ಆಹಾರ ಧಾನ್ಯಗಳನ್ನು ಸಂಗ್ರಹಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.
ಬೆಂಬಲ ಬೆಲೆ ನಿಗದಿ ಮಾಡುವವರು ಯಾರು?
ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರಕಾರವು ಆಯಾ ಋತುವಿನ ಆರಂಭದಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿ ಮಾಡುತ್ತದೆ. ಪ್ರಸ್ತುತ ಸ್ವಾಮಿನಾಥನ್ ಆಯೋಗವು ಸೂಚಿಸಿರುವ ಸೂತ್ರವನ್ನು ಆಧರಿಸಿ ಬೆಂಬಲ ಬೆಲೆಯನ್ನು ನಿಗದಿ ಮಾಡಲಾಗುತ್ತಿದೆ. ಕೇಂದ್ರ ಸರಕಾರ 2004 ರಲ್ಲಿ ನೇಮಿಸಿದ್ದ ಸ್ವಾಮಿನಾಥನ್ ಯೋಗವು ದೇಶಾದ್ಯಂತ ಸಮೀಕ್ಷೆ ನಡೆಸಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಲವಾರು ಶಿಫಾರಸುಗಳನ್ನು ನೀಡಿತ್ತು .
ಕನಿಷ್ಠ ಬೆಂಬಲ ಬೆಲೆ ಯೋಜನೆ ಎಲ್ಲಿಯವರೆಗೆ ವಿಸ್ತರಣೆಗೊಂಡಿದೆ?
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2023-24ನೇ ಸಾಲಿನಲ್ಲಿ ಭತ್ತ (Paddy), ರಾಗಿ, ಜೋಳ ಬೆಳೆಗಳನ್ನು ರೈತರಿಂದ ನೇರವಾಗಿ ಖರೀದಿಸಲು ಡಿಸೆಂಬರ್ ಒಂದರಿಂದ ರಿಂದ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಲಾಗಿತ್ತು. ಇದೀಗ ರೈತರ ಮನವಿಯನ್ನು ಮನ್ನಿಸಿ 2024 ನೇ ಮಾರ್ಚ್ 31 ರವರೆಗೆ ವಿಸ್ತರಣೆ ಗೊಂಡಿದೆ. ಕೇಂದ್ರ ಸರ್ಕಾರವು 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಲು ಅನುಮತಿಯನ್ನು ನೀಡಿದೆ. ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದನ್ವಯ 2023-24 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ 2.5 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಅಧಿಕೃತ ಸಂಗ್ರಹಣಾ ಏಜೆನ್ಸಿಗಳ ಮುಖಾಂತರ ಖರೀದಿಸಲು ಅನುಮೋದನೆಯನ್ನು ನೀಡಲಾಗಿದೆ.
ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ 9686935278 ಈ ನಂಬರ್ ಗೆ ಹಾಗೂ ಆಯಾ ತಾಲ್ಲೂಕಿನ ಖರೀದಿ ಕೇಂದ್ರಗಳ ಖರೀದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.