Covid-19: ಮತ್ತೆ ಬಂತು ಕೊರೊನಾ, ಕ್ರಿಸ್ಮಸ್, ಹೊಸವರ್ಷ ಸಂಭ್ರಮದಲ್ಲಿರುವವರಿಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ!
ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಆದರೆ ಈಗಾಗಲೇ ದೇಶಾದ್ಯಂತ ಎಡೆಬಿಡದೆ ಕಾಡಿದ ಕೊರೋನಾ ಇದೀಗ ಹೊಸ ತಳಿ JN.1 ಕೇರಳದಲ್ಲಿ ಕಂಡು ಬಂದಿದ್ದು, ಒಬ್ಬರನ್ನು ಬಲಿ ಪಡೆದ ಈ ತಳಿ ಅತ್ಯಂತ ವೇಗವಾಗಿ ಹರಡುತ್ತಿರುವುದು ಎಲ್ಲರಲ್ಲೂ ಭಯ ಹುಟ್ಟಿಸುವಂತಿದೆ.
ಹೌದು, ಕರ್ನಾಟಕದ ಮಂಡ್ಯದಲ್ಲಿ ಒಂದು ಪ್ರಕರಣ ಕಂಡು ಬಂದಿದ್ದು, ಜನರ ನಿದ್ದೆಗೆಡಿಸಿದೆ. ಕೊರೊನಾ ವೈರಸ್ನ ಜೆಎನ್1 ರೂಪಾಂತರಿಯಿಂದಾಗಿ Covid-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
CM Siddaramaiah ಹೇಳಿದ್ದೇನು?
ಇಂದು ಕೋವಿಡ್ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವುದಿಲ್ಲ ಎಂದರು.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ.
ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಪೋಸ್ಟ್ ಮಾಡಿದ್ದಾರೆ, ಕೊರೋನಾ ಸೋಂಕಿನ ಬಗ್ಗೆ ಭಯ ಬೇಡ. ಜಾಗೃತಿ ಇರಲಿ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು CM ಸ್ಪಷ್ಡಪಡಿಸಿದ್ದಾರೆ.
ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ?
- ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿ) ವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (Vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.